Advertisement

ಶಾಲೆಗಳಲ್ಲಿ ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

Advertisement

"ಶಾಲೆಗಳಲ್ಲಿ ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಅವುಗಳ ಜೊತೆ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿ" ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು #ರಾಜಕೀಯಗಿಮಿಕ್, #ದಿವಾಳಿಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ನ ಅಡಿಯಲ್ಲಿ, ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

"ಶಾಲೆಗಳಲ್ಲಿ ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ, ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ" ಎಂದವರು ಹೇಳಿದ್ದಾರೆ.

"ರಾಜ್ಯದಲ್ಲಿ ಬಿ.ಸಿ.ನಾಗೇಶ್ ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕಾತಿವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ" ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

"ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು?" ಎಂದವರು ಪ್ರಶ್ನಿಸಿದ್ದಾರೆ.

"ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ" ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

"ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು" ಎಂದವರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

Advertisement
Advertisement
Recent Posts
Advertisement